ಕೃತಕ ಬುದ್ಧಿಮತ್ತೆಯ ಯುಗದಲ್ಲಿ ಕೌಶಲ್ಯಾಭಿವೃದ್ಧಿ ಕುರಿತು ವಿಶೇಷ ಕಾರ್ಯಗಾರ
ದಾವಣಗೆರೆ, ಮಾ. 06:
ಸ.ಪ್ರ.ದ ಮಹಿಳಾ ಕಾಲೇಜು, ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ಒಂದು ದಿನದ ವಿಶೇಷ ಕಾರ್ಯಗಾರದ ಉದ್ಘಾಟನಾ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ 09 ಗಂಟೆಗೆ ಕಾಲೇಜಿನ ನಿವೇದಿತಾ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾ. ಕರಿಬಸಪ್ಪ ಟಿ. ವಹಿಸಿದ್ದರು. ನಿವೃತ್ತ ಪ್ರಾಚಾರ್ಯರು ಹಾಗೂ ಸಿಡಿಸಿ ಸದಸ್ಯರಾದ ಪ್ರೊ. ಈಶ್ವರಪ್ಪ ಕೆ.ಎಸ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ಶಿಕ್ಷಣ ತಜ್ಞರು, ತತ್ವಜ್ಞಾನಿ ಹಾಗೂ ಬಹುಶಾಖಾ ಸಂಪನ್ಮೂಲ ವ್ಯಕ್ತಿಯಾದ ಶ್ರೀ ಸಾಗರ್ ಎ.ಎಚ್ ಅವರು ಸಂಪನ್ಮೂಲ ವ್ಯಕ್ತಿಯಾಗಿ “ಕೃತಕ ಬುದ್ಧಿಮತ್ತೆಯ ಯುಗದಲ್ಲಿ ವಿದ್ಯಾರ್ಥಿಗಳಿಗೆ ವಿಮರ್ಶಾತ್ಮಕ ಚಿಂತನೆ, ತಾರ್ಕಿಕ ಮನೋಭಾವ ಮತ್ತು ಮೃದು ಕೌಶಲ್ಯಗಳು” ಎಂಬ ವಿಷಯದ ಕುರಿತು ಮಾತನಾಡಿ, ವಿದ್ಯಾರ್ಥಿಗಳು ಹಾಗೂ ಬೋಧಕರಿಗೆ ಉಪಯುಕ್ತವಾದ ವಿಚಾರಗಳನ್ನು ಹಂಚಿಕೊಂಡರು.
ಇಂಗ್ಲಿಷ್ ವಿಭಾಗದ ಮುಖ್ಯಸ್ಥರು ಹಾಗೂ ಐಕ್ಯೂಎಸಿ ಸಂಯೋಜಕರಾದ ಡಾ. ಭೀಮಪ್ಪ ಎಂ.ಪಿ ಅವರು ವಾಸ್ತವಿಕ ನುಡಿ ನೀಡಿ ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವವನ್ನು ವಿವರಿಸಿದರು.
ಈ ಸಂದರ್ಭದಲ್ಲಿ ವಿಜ್ಞಾನ ವಿಭಾಗದ ಕಾರ್ಯಕ್ರಮ ಸಂಯೋಜಕರಾದ ಡಾ. ಘೌಸ್ ಖಾನ್, ಕಲಾ ವಿಭಾಗದ ಕಾರ್ಯಕ್ರಮ ಸಂಯೋಜಕರಾದ ಪ್ರೊ. ತೊಪ್ಪಳ ಮಲ್ಲಿಕಾರ್ಜುನ ಗೌಡ, ವಾಣಿಜ್ಯ ವಿಭಾಗದ ಕಾರ್ಯಕ್ರಮ ಸಂಯೋಜಕರಾದ ಡಾ. ಪಾರ್ಥಸಾರಥಿ ಎ.ಎಲ್. ಗಣಿತ ವಿಭಾಗದ ಮುಖ್ಯಸ್ಥರಾದ ಶಿವರಾಜು ಹಾಗೂ ಸುರೇಖಾ.ಬಿ ಮುಂತಾದವರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿನಿ ದ್ರಾಕ್ಷಾಯಿಣಿ ಅವರು ಪ್ರಾರ್ಥನೆ ಸಲ್ಲಿಸಿದರು. ಡಾ. ಪಾರ್ಥಸಾರಥಿ ಎ.ಎಲ್ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮವನ್ನು ಸುರೇಖಾ ಬಿ. ಅವರು ನಿರೂಪಿಸಿದರು. ಕೊನೆಯಲ್ಲಿ ರಾಮಚಂದ್ರಪ್ಪ ಅವರು ವಂದನಾರ್ಪಣೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಪ್ರಾಚಾರ್ಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಗೂ ಸಿಡಿಸಿ ಸದಸ್ಯರು ಭಾಗವಹಿಸಿದ್ದರು.