ಬಿರುಗಾಳಿ ಸಹಿತ ಮಳೆಗೆ ಬೆಳೆ ಹಾನಿ: ತಕ್ಷಣದ ಪರಿಹಾರಕ್ಕೆ ಮಲ್ಲನಗೌಡ ಹಗರಟಗಿ ಆಗ್ರಹ
ಹುಣಸಗಿ : ತಾಲೂಕಿನಾದ್ಯಂತ ಇತ್ತೀಚೆಗೆ ಬೀಸಿದ ಭೀಕರ ಬಿರುಗಾಳಿ ಸಹಿತ ಮಳೆಗೆ ಹಲವು ಗ್ರಾಮಗಳಲ್ಲಿ ವ್ಯಾಪಕ ಬೆಳೆ ಹಾನಿಯಾಗಿದ್ದು, ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ತಕ್ಷಣವೇ ವೈಜ್ಞಾನಿಕವಾಗಿ ಪರಿಹಾರ ಘೋಷಿಸಬೇಕೆಂದು ರಾಜ್ಯ ರೈತ ಸಂಘ ಹಸಿರುಸೇನೆ ಜಿಲ್ಲಾಧ್ಯಕ್ಷ ಮಲ್ಲನಗೌಡ ಹಗರಟಗಿ ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.
ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದ್ದು, ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಬೆಳೆದು ನಿಂತಿದ್ದ ಭತ್ತದ ಪೈರುಗಳು ಬಿರುಗಾಳಿಯ ಹೊಡೆತಕ್ಕೆ ನೆಲಸಮವಾಗಿವೆ. ಇದರಿಂದ ರೈತರು ಹಾಕಿದ ಬಂಡವಾಳವೂ ವಾಪಸ್ ಬರದ ಸ್ಥಿತಿ ನಿರ್ಮಾಣವಾಗಿದೆ. ಕಂದಾಯ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ತಕ್ಷಣವೇ ಜಂಟಿ ಸಮೀಕ್ಷೆ ನಡೆಸಿ, ಹಾನಿಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು. ಸಂತ್ರಸ್ತ ರೈತರ ಖಾತೆಗಳಿಗೆ ವಿಳಂಬ ಮಾಡದೆ ಸೂಕ್ತ ಪರಿಹಾರ ಧನ ಜಮೆ ಮಾಡುವ ಮೂಲಕ ಅನ್ನದಾತನ ನೆರವಿಗೆ ಧಾವಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಒಂದು ವೇಳೆ ಪರಿಹಾರ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸಿದರೆ ಮುಂದಿನ ದಿನಗಳಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.