ದಾವಣಗೆರೆ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ ಆಚರಣೆ
ಮಹಿಳೆಯರು ಹಕ್ಕುಗಳನ್ನು ಪಡೆದುಕೊಳ್ಳಬೇಕು: ಪ್ರಭಾರ ಪ್ರಾಂಶುಪಾಲರಾದ ಡಾ. ಭೀಮಪ್ಪ ಎಂ. ಪಿ
ದಾವಣಗೆರೆ, ಮಾ. 17: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (AIMSS) ಹಾಗೂ ಕಾಲೇಜಿನ ಐಕ್ಯೂಎಸಿ (IQAC) ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಂಗಳವಾರ ಆಚರಿಸಲಾಯಿತು.
ನಿವೇದಿತಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು AIMSS ರಾಜ್ಯ ಕಾರ್ಯದರ್ಶಿ ಶ್ರೀಮತಿ ಶೋಭಾ ಎಸ್ ಅವರು ಉದ್ಘಾಟಿಸಿ ಮಾತನಾಡಿ, ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳನ್ನು ಉದಾಹರಣೆಗಳ ಸಮೇತ ವಿವರಿಸಿದರು. ಇಂತಹ ದೌರ್ಜನ್ಯಗಳ ವಿರುದ್ಧ ಮಹಿಳೆಯರು ಸಂಘಟಿತವಾಗಿ ಹೋರಾಡಬೇಕು ಎಂದು ಕರೆ ನೀಡಿದರು.
AIMSS ಜಿಲ್ಲಾ ಅಧ್ಯಕ್ಷೆ ಶ್ರೀಮತಿ ಜ್ಯೋತಿ ರಶ್ಮಿ ಅವರು ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಯನ್ನು ನೀಡಿ, ಮಹಿಳಾ ಸಬಲೀಕರಣದ ಅಗತ್ಯವನ್ನು ಒತ್ತಿಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಭಾರ ಪ್ರಾಂಶುಪಾಲರಾದ ಡಾ. ಭೀಮಪ್ಪ ಎಂ. ಪಿ ಅವರು, ಮಹಿಳೆಯರು ತಮ್ಮ ಹಕ್ಕುಗಳನ್ನು ಕೇಳುವುದಕ್ಕಿಂತ ಅವನ್ನು ಪಡೆದುಕೊಳ್ಳುವ ಧೈರ್ಯವನ್ನು ಹೊಂದಬೇಕು ಎಂದು ಹೇಳಿದರು. ಮಹಿಳೆಯರು ಮಾನಸಿಕ ಹಾಗೂ ಭೌತಿಕವಾಗಿ ಶಕ್ತಿಶಾಲಿಗಳಾಗಿದ್ದು, ಸಮಾಜದಲ್ಲಿ ತಮ್ಮ ಸ್ಥಾನವನ್ನು ಇನ್ನಷ್ಟು ಬಲಪಡಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮವು ಕು. ದ್ರಾಕ್ಷಾಯಣಿ ಅವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಗಿ, ಕು. ಕೀರ್ತಾನಾ ಎಂ ಅವರು ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ಸುರೇಖಾ ಬಿ ಅವರು ನಿರ್ವಹಿಸಿದರು. ಕೊನೆಯಲ್ಲಿ ಕು. ಸಂಗೀತಾ ಅವರು ವಂದನಾರ್ಪಣೆ ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ಡಾ. ಪಾರ್ಥಸಾರಥಿ ಎಲ್ ಹಾಗೂ ಡಾ. ಸಿದ್ದಲಿಂಗಮ್ಮ ಉಪಸ್ಥಿತರಿದ್ದರು.