ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಗೆ ಶಾಸಕ ಶರಣಗೌಡ ಕಂದಕೂರ ಆಗ್ರಹ: ಜಿಲ್ಲಾಧಿಕಾರಿಗಳಿಗೆ ಪತ್ರ
ಯಾದಗಿರಿ : ಜಿಲ್ಲೆಯ ವಡಗೇರಾ ತಾಲೂಕಿನ ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆಯು ರೈತರಿಂದ ಕಬ್ಬು ಖರೀದಿ ಮಾಡಿ ತಿಂಗಳು ಕಳೆದರೂ ಬಾಕಿ ಹಣ ಪಾವತಿಸದ ಹಿನ್ನೆಲೆಯಲ್ಲಿ, ಗುರುಮಿಠಕಲ್ ಶಾಸಕ ಶರಣಗೌಡ ಕಂದಕೂರ ಅವರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಯ ಸುಮಾರು 3,314 ರೈತರು ಈ ಕಾರ್ಖಾನೆಗೆ ಕಬ್ಬು ಮಾರಾಟ ಮಾಡಿದ್ದು, ಒಟ್ಟು ಪಾವತಿಸಬೇಕಾದ 142.86 ಕೋಟಿ ರೂಪಾಯಿಗಳ ಪೈಕಿ 100 ಕೋಟಿ ರೂಪಾಯಿಗಳನ್ನು ಮಾತ್ರ ನೀಡಲಾಗಿದೆ. ಉಳಿದ 42 ಕೋಟಿ ರೂಪಾಯಿಗಳ ಬಾಕಿ ಮೊತ್ತವನ್ನು ಪಾವತಿಸಲು ಕಾರ್ಖಾನೆಯ ಆಡಳಿತ ಮಂಡಳಿಯು ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗಡುವು ನೀಡಿದ್ದರೂ ಸಹ, ಏಪ್ರಿಲ್ ಅಂತ್ಯದವರೆಗೂ ಹಣ ಬಿಡುಗಡೆ ಮಾಡದೆ ರೈತರನ್ನು ಸತಾಯಿಸುತ್ತಿದ್ದಾರೆ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ ಈ ಭಾಗದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಮೇ ತಿಂಗಳ ಮೊದಲ ವಾರದೊಳಗೆ ಬಾಕಿ ಮೊತ್ತವನ್ನು ಬಿಡುಗಡೆ ಮಾಡಲು ಕಾರ್ಖಾನೆ ಮಾಲೀಕರಿಗೆ ಜಿಲ್ಲಾಧಿಕಾರಿಗಳು ಕಡಕ್ ನಿರ್ದೇಶನ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಒಂದು ವೇಳೆ ನಿಗದಿತ ಸಮಯದಲ್ಲಿ ಹಣ ಪಾವತಿಯಾಗದಿದ್ದರೆ, ರೈತರೊಂದಿಗೆ ಸೇರಿ ಕಾರ್ಖಾನೆಗೆ ಬೀಗ ಜಡಿದು ಬಂದ್ ಮಾಡಲಾಗುವುದು ಎಂದು ಶಾಸಕರು ಎಚ್ಚರಿಕೆ ನೀಡಿದ್ದಾರೆ.