ಬೀದರ: ಗಡಿನಾಡು ಕನ್ನಡಿಗರ ಸಮಸ್ಯೆಗೆ ಶಾಶ್ವತ ಪರಿಹಾರ ಆಗ್ರಹ
ಬೀದರ: ಗಡಿನಾಡು ಹಾಗೂ ಹೊರನಾಡು ಕನ್ನಡಿಗರ ಪ್ರಮುಖ ಸಮಸ್ಯೆಗಳಿಗೆ ಸರ್ಕಾರ ಶಾಶ್ವತ ಪರಿಹಾರ ನೀಡಬೇಕು ಎಂದು ಧರ್ಮೇಂದ್ರ ಪೂಜಾರಿ ಬಗ್ದೂರಿ ಅವರು ಆಗ್ರಹಿಸಿದ್ದಾರೆ. ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ, ಗಡಿನಾಡು ಕನ್ನಡ ವಿದ್ಯಾರ್ಥಿಗಳ “ಕನ್ನಡ ಮಾಧ್ಯಮ ಪ್ರಶಸ್ತಿ” ಮತ್ತು ಶಿಷ್ಯವೇತನ ಯೋಜನೆಯನ್ನು ತಕ್ಷಣ ಮರುಜಾರಿಗೆ ತರಬೇಕೆಂದು ಒತ್ತಾಯಿಸಿದ್ದಾರೆ. 2011-12ರಲ್ಲಿ ಆರಂಭವಾದ ಈ ಯೋಜನೆ 2022-23ರಿಂದ ಸ್ಥಗಿತಗೊಂಡಿದ್ದು, ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಅವಕಾಶ ನೀಡುತ್ತಿದ್ದುದಾಗಿ ಅವರು ತಿಳಿಸಿದ್ದಾರೆ.
ಧರ್ಮೇಂದ್ರ ಪೂಜಾರಿ ಬಗ್ದೂರಿ ಅವರು ತೆಲಂಗಾಣ, ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಸರಕಾರದಿಂದ ಸಮರ್ಪಕ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆ ಸೇರಿದಂತೆ ಹಲವು ಗ್ರಾಮಗಳಲ್ಲಿ ಸುಮಾರು 485 ವಿದ್ಯಾರ್ಥಿಗಳು ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುತ್ತಿರುವುದಾಗಿ ಮತ್ತು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿರುವುದಾಗಿ ತಿಳಿಸಿದ್ದಾರೆ. ಅವರು ಹೊರನಾಡಿನ ಕನ್ನಡ ವಿದ್ಯಾರ್ಥಿಗಳಿಗೆ ಕರ್ನಾಟಕದ ಉನ್ನತ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಹಾಗೂ ಸೌಲಭ್ಯಗಳ ಮಾಡಬೇಕೆಂದು ಆಗ್ರಹಿಸಿದ್ದಾರೆ. ಅಲ್ಲದೆ, ಕನ್ನಡ ಭವನ ನಿರ್ಮಾಣ ಹಾಗೂ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರಕ್ಕೆ ನಾಮ ನಿರ್ದೇಶಿತ ಸದಸ್ಯರ ನೇಮಕಾತಿ ಕೂಡ ಕೇಳಿದ್ದಾರೆ.