ಪ್ರಿಯಾಂಕ್ ಖರ್ಗೆ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲು ಕಾಂಗ್ರೆಸ್ ಮುಖಂಡ ಧರ್ಮು ಗಿರೆಪ್ಪನೋರ್ ಒತ್ತಾಯ
ಯಾದಗಿರಿ : ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಹೇಗೆ ಕಾರಣಕರ್ತರೋ, ಅದೇ ರೀತಿ ಪ್ರಿಯಾಂಕ್ ಖರ್ಗೆ ಅವರು ಕೂಡ ಪ್ರಮುಖ ಕಾರಣಕರ್ತರಾಗಿದ್ದಾರೆ. ಆದ್ದರಿಂದ ಹೊಸದಾಗಿ ರಚನೆಯಾಗಲಿರುವ ಸಚಿವ ಸಂಪುಟದಲ್ಲಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಲೇಬೇಕು ಎಂದು ಯಾದಗಿರಿ ಕಾಂಗ್ರೆಸ್ ಮುಖಂಡರಾದ ಧರ್ಮು ಗಿರೆಪ್ಪನೋರ್ ಅವರು ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪಿಎಸ್ಐ ಹಗರಣ ಸೇರಿದಂತೆ ಹತ್ತಾರು ಭ್ರಷ್ಟಾಚಾರದ ಹಗರಣಗಳನ್ನು ಧೈರ್ಯವಾಗಿ ಎತ್ತಿ ತೋರಿಸಿ, ಜನರೆದುರು ಬಯಲಿಗೆಳೆದ ನಾಯಕ ಎಂದರೆ ಅದು ಪ್ರಿಯಾಂಕ್ ಖರ್ಗೆ ಅವರು. ಅವರ ಹೋರಾಟದ ಫಲವಾಗಿಯೇ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಾಯಿತು ಎಂದು ಸ್ಮರಿಸಿದರು. ಪ್ರಿಯಾಂಕ್ ಖರ್ಗೆ ಅವರಿಗೆ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಮಗ ಎನ್ನುವ ಗುರುತು ಮಾತ್ರವಿಲ್ಲ, ಬದಲಿಗೆ ಸ್ವಂತ ಪರಿಶ್ರಮ, ದಕ್ಷ ಕೆಲಸ ಹಾಗೂ ಅಭಿವೃದ್ಧಿ ಪರ ಚಿಂತನೆಗಳ ಮೂಲಕ ತಮ್ಮದೇ ಆದ ಹೆಸರು ಮಾಡಿದ್ದಾರೆ. ಅವರ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಇಂತಹ ಯುವ ನಾಯಕರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿದರೆ ರಾಜ್ಯದ ಯುವ ಸಮುದಾಯಕ್ಕೆ ಹಾಗೂ ಪಕ್ಷದ ಸಂಘಟನೆಗೆ ಮತ್ತಷ್ಟು ಆನೆ ಬಲ ಬಂದಂತಾಗುತ್ತದೆ. ಪ್ರಸ್ತುತ ಕಲ್ಬುರ್ಗಿ ಜಿಲ್ಲೆ ಸೇರಿದಂತೆ ಇಡೀ ಕರ್ನಾಟಕದ ಮೂಲೆ ಮೂಲೆಗಳಲ್ಲಿಯೂ ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂಬ ಕೂಗು ಕೇಳಿ ಬರುತ್ತಿದೆ. ಹೈಕಮಾಂಡ್ ಹಾಗೂ ರಾಜ್ಯದ ನಾಯಕರು ಇವರ ಕೆಲಸವನ್ನು ಪರಿಗಣಿಸಿ ತಕ್ಷಣವೇ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಧರ್ಮು ಗಿರೆಪ್ಪನೋರ್ ಹೇಳಿದ್ದಾರೆ.