ರುದ್ರಪ್ಪ ಲಮಾಣಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ಮುಖಂಡ ರವಿ ರಾಠೋಡ್ ಮುದ್ನಾಳ್ ಒತ್ತಾಯ
ಯಾದಗಿರಿ : ಹಾವೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಏಕೈಕ ಶಾಸಕರು ಹಾಗೂ ಬಂಜಾರ ಸಮಾಜದ ಹಿರಿಯ ನಾಯಕರಾದ ರುದ್ರಪ್ಪ ಎಲ್. ಲಮಾಣಿ ಅವರಿಗೆ ಮುಂಬರುವ ಸಂಪುಟ ಪುನಾರಚನೆಯಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ಯುವ ಘಟಕದ ಮಾಜಿ ಜಿಲ್ಲಾಧ್ಯಕ್ಷರಾದ ರವಿ ರಾಠೋಡ್ ಮುದ್ನಾಳ್ ಅವರು ಹೈಕಮಾಂಡ್ಗೆ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ರುದ್ರಪ್ಪ ಲಮಾಣಿ ಅವರು ಸಮಾಜದಲ್ಲಿ ಮತ್ತು ರಾಜಕೀಯವಾಗಿ ಸುದೀರ್ಘ ಅನುಭವ ಹೊಂದಿರುವ ಸೌಮ್ಯ ಹಾಗೂ ದಕ್ಷ ನಾಯಕರಾಗಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಗೆದ್ದು ಬಂದಿರುವ ಏಕೈಕ ಶಾಸಕರಾಗಿರುವ ಅವರು, ಈ ಹಿಂದೆ ವಿಧಾನಸಭೆಯ ಉಪಸಭಾಪತಿಯಾಗಿಯೂ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ. ರಾಜ್ಯದಲ್ಲಿ ಬಂಜಾರ ಮತ್ತು ಲಂಬಾಣಿ ಸಮುದಾಯದ ಏಳಿಗೆಗಾಗಿ ಅವರು ನಿರಂತರವಾಗಿ ಶ್ರಮಿಸುತ್ತಾ ಬಂದಿದ್ದಾರೆ ಎಂದು ತಿಳಿಸಿದರು. ರಾಜ್ಯದಲ್ಲಿ ಬಂಜಾರ ಸಮಾಜವು ದೊಡ್ಡ ಜನಸಂಖ್ಯೆಯನ್ನು ಹೊಂದಿದ್ದು, ಪಕ್ಷದ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಸಮುದಾಯದ ಹಿರಿಯ ನಾಯಕರಾದ ರುದ್ರಪ್ಪ ಲಮಾಣಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದರಿಂದ ಇಡೀ ಸಮಾಜಕ್ಕೆ ದೊಡ್ಡ ಗೌರವ ಸಿಕ್ಕಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯದ ಹಿರಿಯ ನಾಯಕರು ಬಂಜಾರ ಸಮಾಜದ ಹಿತದೃಷ್ಟಿಯಿಂದ ರುದ್ರಪ್ಪ ಲಮಾಣಿ ಅವರಿಗೆ ಸೂಕ್ತ ಸ್ಥಾನಮಾನ ನೀಡಿ ಗೌರವಿಸಬೇಕು ಎಂದು ರವಿ ರಾಠೋಡ್ ಮುದ್ನಾಳ್ ಆಗ್ರಹಿಸಿದ್ದಾರೆ.