ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾಗಿ ಪ್ರಿಯಾಂಕ್ ಖರ್ಗೆ ಮುಂದುವರಿಯಲಿ ದಿಲೀಪ್ ಕುಮಾರ್ ಒತ್ತಾಯ
ದೇವನಹಳ್ಳಿ: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನಮಾನ ಸಿಗುವ ನಿರೀಕ್ಷೆ ಇದೆ.ಆದರೂ ಸಹ ರಾಜ್ಯದ ಎಲ್ಲಾ ಪಿಡಿಒಗಳ ಆಶಯದಂತೆ ಆರ್.ಡಿ.ಪಿ.ಆರ್. ಇಲಾಖೆಯ ಸಚಿವರಾಗಿಯೇ ಮುಂದುವರಿಯಬೇಕೆಂದು ಪಿಡಿಒಗಳ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ದಿಲೀಪ್ ಕುಮಾರ್ ಬಿ.ಎಂ. ಒತ್ತಾಯಿಸಿದ್ದಾರೆ.
ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ದಿಲೀಪ್ ಕುಮಾರ್ ಬಿ.ಎಂ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರಿಯಾಂಕ ಖರ್ಗೆ ಅವರು ಸಚಿವರು ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ನಂತರ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಅನೇಕ ಮಹತ್ವದ, ಜನಪರ ಹಾಗೂ ಆಡಳಿತಾತ್ಮಕ ಸುಧಾರಣೆಗಳು ಜಾರಿಯಾಗಿರುವುದಾಗಿದೆ. ಮುಖ್ಯವಾಗಿ, ಇಲಾಖೆಯಲ್ಲಿ ಪಾರದರ್ಶಕ ಹಾಗೂ ನೌಕರ ಸ್ನೇಹಿ ವರ್ಗಾವಣೆ ವ್ಯವಸ್ಥೆಯನ್ನು ಜಾರಿಗೊಳಿಸುವ ಪ್ರಾಮಾಣಿಕ ಪ್ರಯತ್ನಗಳು ನಡೆದಿದ್ದು, ನೌಕರರಲ್ಲಿ ವಿಶ್ವಾಸ ಮೂಡಿಸಿದೆ ಎಂದು ಅವರು ಹೇಳಿದ್ದಾರೆ.
ಗ್ರಾಮ ಪಂಚಾಯಿತಿಗಳ ಆರ್ಥಿಕ ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ವಿನೂತನ ತೆರಿಗೆ ತಂತ್ರಾಂಶಗಳು ಹಾಗೂ ವ್ಯವಸ್ಥಿತ ತೆರಿಗೆ ಸಂಗ್ರಹಣಾ ಪದ್ಧತಿಯನ್ನು ಜಾರಿಗೆ ತಂದು, ಗ್ರಾಮೀಣ ಸ್ಥಳೀಯ ಸರ್ಕಾರಗಳನ್ನು ಆರ್ಥಿಕವಾಗಿ ಬಲಿಷ್ಠಗೊಳಿಸುವ ಕಾರ್ಯಕ್ಕೆ ಸಚಿವರು ಆದ್ಯತೆ ನೀಡಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಯುವ ಸಮುದಾಯದಲ್ಲಿ ಓದುವ ಹವ್ಯಾಸ ಮತ್ತು ಜ್ಞಾನಾಭಿವೃದ್ಧಿಯನ್ನು ಉತ್ತೇಜಿಸುವ ಉದ್ದೇಶದಿಂದ ಗ್ರಾಮೀಣ ಮಟ್ಟದಲ್ಲಿ ಡಿಜಿಟಲ್ ಲೈಬ್ರರಿ ವ್ಯವಸ್ಥೆಯನ್ನು ಜಾರಿಗೊಳಿಸಿರುವುದು ಸಚಿವರ ಅವಧಿಯ ಮಹತ್ವದ ಸಾಧನೆಗಳಲ್ಲಿ ಒಂದಾಗಿದೆ. ಇದರ ಜೊತೆಗೆ, ಸಾರ್ವಜನಿಕರು ಮನೆಬಾಗಿಲಲ್ಲಿಯೇ ವಿವಿಧ ಗ್ರಾಮ ಪಂಚಾಯಿತಿ ಸೇವೆಗಳನ್ನು ಪಡೆಯುವ ಉದ್ದೇಶದಿಂದ ಖಾತೆ ಹಾಗೂ ಇತರೆ ಸೇವೆಗಳಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಮತ್ತು ನೇರ ಸೇವಾ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸಿ, ಸಾರ್ವಜನಿಕ ಸೇವಾ ವಿತರಣೆಯನ್ನು ಇನ್ನಷ್ಟು ಸುಲಭ ಮತ್ತು ಪಾರದರ್ಶಕಗೊಳಿಸಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ಇಲಾಖೆಯ ನೌಕರರ ಪರವಾಗಿ ಇನ್ನೂ ಹಲವು ಪ್ರಮುಖ ನಿರೀಕ್ಷೆಗಳು ಉಳಿದಿವೆ ಹಾಗಾಗಿ ಅವರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಜ್ಯೇಷ್ಠತಾ ನಿಯಮಗಳಿಗೆ ಸಂಬಂಧಿಸಿದ ಹಲವು ವರ್ಷಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರಕಬೇಕು ಎಂಬ ಆಶಯವಿದೆ ಎಂದರು.
ಅದೇ ರೀತಿ, ಇಲಾಖೆಯಲ್ಲಿನ ವಿವಿಧ ಹುದ್ದೆಗಳನ್ನು ಗ್ರೂಪ್–ಬಿ ಹುದ್ದೆಗಳಾಗಿ ಮೇಲ್ದರ್ಜೆಗೇರಿಸುವ ಸಂಬಂಧ ಮಾನ್ಯ ಸಚಿವರು ಸಕಾರಾತ್ಮಕ ನಿಲುವು ತಾಳಿರುವುದು ನೌಕರರಲ್ಲಿ ಹೆಚ್ಚಿನ ವಿಶ್ವಾಸ ಮೂಡಿಸಿದೆ. ಹೀಗಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಆರಂಭವಾಗಿರುವ ಅಭಿವೃದ್ಧಿ ಮತ್ತು ಸುಧಾರಣಾ ಕಾರ್ಯಗಳು ನಿರಂತರವಾಗಿ ಮುಂದುವರಿಯಬೇಕಾದರೆ, ಪ್ರಿಯಾಂಕ್ ಖರ್ಗೆ ಅವರು ಉಪಮುಖ್ಯಮಂತ್ರಿಗಳ ಜವಾಬ್ದಾರಿಯ ಜೊತೆಗೆ ಇದೇ ಇಲಾಖೆಯ ಸಚಿವರಾಗಿ ಮುಂದುವರಿಯಬೇಕು ಎಂದು ಆಗ್ರಹಿಸಿ, ನಿಯೋಜಿತ ಮುಖ್ಯಮಂತ್ರಿ ಅವರಲ್ಲಿ ಸಂಘದ ಪರವಾಗಿ ಮನವಿ ಮಾಡುತ್ತೇವೆ ಎಂದು ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ದಿಲೀಪ್ ಕುಮಾರ್ ಬಿ.ಎಂ ತಿಳಿಸಿದರು.
ಚಿತ್ರ: ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ದಿಲೀಪ್ ಕುಮಾರ್ ಬಿ.ಎಂ ಭಾವಚಿತ್ರ.